ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೈಗೊಳ್ಳಲಾಗಿರುವ ಸ್ಮಾರ್ಟ್ ಸಿಟಿ ಕಾಮಗಾರಿಯಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಅಧಿಕಾರಿಗಳಿಗೆ ತಿಳಿಸಿದರು.

ಅವರು ಶನಿವಾರ ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳ ಪರಿಶೀಲನೆ ನಡೆಸಿದರು.

ಕೆಲವು ಕಾಮಗಾರಿಗಳು ನಿಗದಿತ ಅವಧಿಗಿಂತ ವಿಳಂಬವಾಗಿ ನಡೆಯುತ್ತಿರುವುದು ಗಮನಕ್ಕೆ ಬಂದಿದೆ. ಇಂತಹ ಪ್ರಕರಣಗಳಲ್ಲಿ ಗುತ್ತಿಗೆದಾರರಿಗೆ ದಂಡ ವಿಧಿಸಿ ಕಾಮಗಾರಿಯನ್ನು ಆದಷ್ಟು ಬೇಗನೆ ಪೂರ್ಣಗೊಳಿಸಬೇಕು. ಕಾಮಗಾರಿಯ ಗುಣಮಟ್ಟದಲ್ಲಿ ಯಾವುದೇ ಕೊರತೆಯಾಗದಂತೆ ಎಚ್ಚರಿಕೆ ವಹಿಸಬೇಕು

ನಗರದಲ್ಲಿ ಈಗಾಗಲೇ ಕೈಗೊಳ್ಳಲಾಗಿರುವ 24×7 ಕುಡಿಯುವ ನೀರು ಪೂರೈಕೆ ಕಾಮಗಾರಿಯನ್ನು ಸ್ಮಾರ್ಟ್ ಸಿಟಿ ಕಾಮಗಾರಿಗಳ ವ್ಯಾಪ್ತಿಯಲ್ಲಿ ಮೊದಲು ಪೂರ್ಣಗೊಳಿಸಬೇಕು. ಸ್ಮಾರ್ಟ್ ಸಿಟಿ ಕಾಮಗಾರಿ ಮುಗಿದ ಬಳಿಕ ಯಾವುದೇ ಕಾರಣಕ್ಕೂ ರಸ್ತೆಯನ್ನು ಅಗೆಯಲು ಅವಕಾಶ ಇರುವುದಿಲ್ಲ. ಪೈಪ್‍ಲೈನ್ ಅಳವಡಿಕೆಗೆ ಸಮಸ್ಯೆಗಳು ಬರಬಹುದಾದ ಸ್ಥಳಗಳನ್ನು ಗುರುತಿಸಿ ಪರ್ಯಾಯ ವ್ಯವಸ್ಥೆಯನ್ನು ಕೈಗೊಳ್ಳಬೇಕು ಎಂದು ಅವರು ಕರ್ನಾಟಕ ನಗರ ನೀರು ಪೂರೈಕೆ ಮತ್ತು ಒಳಚರಂಡಿ ಮಂಡಳಿ ಅಧಿಕಾರಿಗಳಿಗೆ ಸೂಚಿಸಿದರು.

ಕ್ರಿಮಿನಲ್ ಮೊಕದ್ದಮೆ ಎಚ್ಚರಿಕೆ: ಇದೇ ರೀತಿ ವಿದ್ಯುತ್ ಕಂಬಗಳನ್ನು ತೆರವುಗೊಳಿಸುವ ಕಾರ್ಯವನ್ನು ಮೆಸ್ಕಾಂ ಮೊದಲು ಪೂರ್ಣಗೊಳಿಸಬೇಕು. ಸ್ಮಾರ್ಟ್ ಸಿಟಿ ಕಾಮಗಾರಿಗಳು ನಡೆಯುತ್ತಿರುವ ಕಡೆಗಳಲ್ಲಿ ಸಾರ್ವಜನಿಕರ ಸಂಚಾರಕ್ಕೆ ಯಾವುದೇ ತೊಡಕಾಗದಂತೆ ಎಚ್ಚರಿಕೆ ವಹಿಸಬೇಕು. ಕಾಮಗಾರಿಗಳ ಸ್ಥಳದಲ್ಲಿ ಅಗತ್ಯ ಎಚ್ಚರಿಕೆ ಫಲಕಗಳು, ಸೂಚಕಗಳನ್ನು ಅಳವಡಿಸಬೇಕು. ಯಾವುದೇ ಅವಘಡಗಳು ಸಂಭವಿಸಿದರೆ ಸಂಬಂಧಪ ಟ್ಟ ಗುತ್ತಿಗೆದಾರರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

ಸಾಗರ ರಸ್ತೆಯಲ್ಲಿ ಗೃಹ ಇಲಾಖೆಗೆ ಸೇರಿದ ಕೆಲವು ಕಂಪೌಂಡ್‍ಗಳನ್ನು ತೆರವುಗೊಳಿಸಿ ಹಿಂದಕ್ಕೆ ಕಟ್ಟಬೇಕಾಗಿದ್ದು, ಈ ಕುರಿತು ಸಂಬಂಧಪಟ್ಟವರ ಹತ್ತಿರ ಮಾತನಾಡಿ ತೆರವುಗೊಳಿಸಿ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಅವರು ಈ ಸಂದರ್ಭದಲ್ಲಿ ತಿಳಿಸಿದರು.

ಪರಿಶೀಲನೆ: ಜಿಲ್ಲಾಧಿಕಾರಿ ಅವರು ಅಶೋಕ ವೃತ್ತದಿಂದ ಆಲ್ಕೋಳ ವೃತ್ತದವರೆಗಿನ ರಸ್ತೆ ಕಾಮಗಾರಿ, ಶರಾವತಿ ನಗರ ಪಾರ್ಕ್, ನರ್ಸ್ ವಸತಿಗೃಹ ಒಳಚರಂಡಿ ಕಾಮಗಾರಿ, ನೆಹರು ಕ್ರೀಡಾಂಗಣ, ಜಯನಗರ ಬಡಾವಣೆಯಲ್ಲಿನ ಕನ್ಸರ್ವೆನ್ಸಿ, ಒಳಚರಂಡಿ ಕಾಮಗಾರಿ, ವಿನಾಯಕ ಪಾರ್ಕ್, ಫ್ಯಾಮಿಲಿ ವೆಲ್ಫೇರ್ ಪಾರ್ಕ್, ಮಲ್ಲೇಶ್ವರ ನಗರ ಪಾರ್ಕ್, ರಿವರ್ ಫ್ರಂಟ್ ಡೆವಲೆಪ್‍ಮೆಂಟ್, ಶಿವಪ್ಪ ನಾಯಕ ಅರಮನೆ ಸೇರಿದಂತೆ ಎಲ್ಲಾ ಕಾಮಗಾರಿಗಳ ಪರಿಶೀಲನೆ ನಡೆಸಿದರು.

ಸ್ಮಾರ್ಟ್ ಸಿಟಿ ಚೀಫ್ ಇಂಜಿನಿಯರ್ ಎಚ್.ಬಸಪ್ಪ, ಎಕ್ಸಿಕ್ಯೂಟಿವ್ ಇಂಜಿನಿಯರ್ ಗಣೇಶ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

error: Content is protected !!