ಶಿವಮೊಗ್ಗ : ಆಗಸ್ಟ್ 11: ಪ್ರಸಕ್ತ ಸಾಲಿನಲ್ಲಿ ಮುಂಗಾರು ವಾಡಿಕೆ ಗಿಂತ ಹೆಚ್ಚು ಪ್ರಮಾಣದಲ್ಲಿ ಆಗಿದ್ದು ರಾಜ್ಯದ ಎಲ್ಲಾ ಜಲಾಶಯಗಳಲ್ಲಿ ನೀರು ಭರ್ತಿಯಾಗಿದೆ. ಕೃಷಿ ಚಟುವಟಿಕೆಗಳು ಚುರುಕಾಗಿದ್ದು ಸಹಜವಾಗಿ ರೈತರಲ್ಲಿ ಹರ್ಷ ಉಂಟು ಮಾಡಿದೆ.
ಭದ್ರಾ ಜಲಾಶಯ ಕೂಡ ಸಕಾಲದಲ್ಲಿ ಭರ್ತಿಯಾಗಿದ್ದು ಜಾತಿ, ಮತ, ಭಾಷೆ- ಬಣ್ಣಗಳನ್ನು ಮೀರಿ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಯಲ್ಲಿನ ರೈತರಿಗೆ ಉಪಕಾರಿಯಾಗಿದೆ ಎಂದವರು ನುಡಿದರು.

ಭದ್ರಾ ಜಲಾಶಯಕ್ಕೆ ಬಾಗಿನ ಸಮರ್ಪಿಸಿದ ನಂತರ ಏರ್ಪಡಿಸಿದ್ದ ಸರಳ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು. ಪ್ರಸ್ತುತ ಸಂದರ್ಭದಲ್ಲಿ ಆಡಳಿತಾರೂಢ ಸರ್ಕಾರವು ಕೂಡ ಗೃಹಲಕ್ಷ್ಮಿ, ಶಕ್ತಿ, ಗೃಹಜ್ಯೋತಿ ಯುವನಿಧಿ, ಅನ್ಯಭಾಗ್ಯದಂತಹ ಅನೇಕ ಜನಪರ ಯೋಜನೆಗಳನ್ನು ಜಾರಿಗೊಳಿಸಿ ಜನಹಿತ ಕಾರ್ಯಕ್ರಮಗಳನ್ನು ಮುಂದುವರಿಸಿದೆ. ಪೂಜ್ಯ ತಂದೆಯವರಾದ ಬಂಗಾರಪ್ಪನವರ ಅಧಿಕಾರ ಅವಧಿಯಲ್ಲಿ 10 ಹೆಚ್ ಪಿ ವರೆಗೆ ಉಚಿತ ವಿದ್ಯುತ್ತನ್ನು ವಿತರಿಸಲಾಗಿತ್ತು ಎಂದವರು ನೆನಪಿಸಿದರು.

ಪ್ರಸ್ತುತ ಸಂದರ್ಭದಲ್ಲಿ ಜೋಗದಲ್ಲಿ ಸುಮಾರು 1200 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಯಾಗುತ್ತಿದೆ. ಇದರೊಂದಿಗೆ ಹೆಚ್ಚುವರಿಯಾಗಿ ಇನ್ನು 2000 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಗೆ ಹೊಸ ಯೋಜನೆ ರೂಪಿಸಲು ಯತ್ನಿಸಲಾಗುತ್ತಿದೆ ಎಂದರು.

ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಉದ್ದೇಶಿಸಲಾಗಿದ್ದು ಈಗಾಗಲೇ ಕಳೆದ ಒಂದು ವರ್ಷದ ಅವಧಿಯಲ್ಲಿ 12 ಸಾವಿರ ಶಿಕ್ಷಕರನ್ನು ನೇಮಿಸಿಕೊಳ್ಳಲಾಗಿದೆ ಅಂತೆಯೇ ಸರ್ಕಾರದ ಅನುದಾನದಿಂದ ನಡೆಯುತ್ತಿರುವ ಅನುದಾನಿತ ಶಾಲೆಗಳಲ್ಲಿನ ಕೊರತೆ ಇರುವ 5000 ಶಿಕ್ಷಕರ ನೇಮಕಾತಿಗೂ ಕೂಡ ಕ್ರಮ ಕೈಗೊಳ್ಳಲಾಗಿದೆ ಎಂದರು. ಜನಸಾಮಾನ್ಯರಿಗೆ ಉತ್ತಮ ಮತ್ತು ಗುಣಮಟ್ಟದ ಶಿಕ್ಷಣ ನೀಡಲು ಕ್ರಮ ಕೈಗೊಳ್ಳಲಾಗಿದೆ

LKG UKG ತರಗತಿಗಳನ್ನು ಸರ್ಕಾರದಿಂದಲೇ ಆರಂಭಿಸಲಾಗುತ್ತಿದೆ ಎಂದರು.

ಭದ್ರಾವತಿಯ ವಿಐಎಸ್ಎಲ್ ಮತ್ತು ಎಂಪಿಎಂ ಕಾರ್ಖಾನೆಗಳ ಪುನರಾರಂಭಕ್ಕೆ ಸರ್ಕಾರ ಸಕಾಲಿಕ ನಿರ್ಣಯ ಕೈಗೊಳ್ಳಲಿದೆ ಮಾತ್ರವಲ್ಲ ಪುನಶ್ಚೇತನಕ್ಕೆ ಕ್ರಮ ವಹಿಸಲಿದೆ ಎಂದರು.

ಶರಾವತಿ ಸೇರಿದಂತೆ ರಾಜ್ಯದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಭೂಮಿಯನ್ನು ಕಳೆದುಕೊಂಡು ಸಂತ್ರಸ್ತರಾಗಿರುವ ಕುಟುಂಬಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಲಿದೆ ಅಲ್ಲದೆ ಪಾರಂಪರಿಕವಾಗಿ ವನವಾಸಿಗಳಾಗಿರುವ ಕುಟುಂಬಗಳಿಗೆ ಒಕ್ಕಲೆಬ್ಬಿಸದಂತೆ ಅರಣ್ಯ ಅಧಿಕಾರಿಗಳಿಗೆ ಸೂಚಿಸಲಾಗಿದೆ. 2015 ರ ನಂತರ ಅರಣ್ಯ ಒತ್ತುವರಿ ಮಾಡುವವರನ್ನು ಸರ್ಕಾರ ರಕ್ಷಿಸಲು ಸಾಧ್ಯವಾಗದು. ಪರಂಪರಾಗತ ವನವಾಸಿಗಳ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾತನಾಡಿ ಸರ್ಕಾರವು ರೈತರು ಮತ್ತು ರೈತ ಮಹಿಳೆಯರ ಪರವಾಗಿ ಸದಾ ಕಾರ್ಯನಿರ್ವಹಿಸಲಿದೆ. ಪ್ರಸ್ತುತ ಭದ್ರಾ ಜಲಾಶಯದಿಂದ ರಾಜ್ಯದ ಸುಮಾರು 11 ಜಿಲ್ಲೆಗಳ 2.50 ಲಕ್ಷ ಹೆಕ್ಟರ್ ಪ್ರದೇಶಕ್ಕೆ ನೀರು ಹರಿಯಲಿದೆ ಎಂದರು.

ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ಕೆರೆಗಳನ್ನು ತುಂಬಿಸುವ ಬೃಹತ್ ಯೋಜನೆಯನ್ನು ಕೈಗೆತ್ತಿಕೊಳ್ಳಲು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿಂತನೆ ನಡೆಸಿದ್ದಾರೆ ಎಂದರು

ಭದ್ರಾವತಿ ಕ್ಷೇತ್ರದ ಶಾಸಕ ಬಿ ಕೆ ಸಂಗಮೇಶ್ವರ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯೆ ಬಲ್ಕಿಶ್ ಬಾನು, ಶ್ರೀಮತಿ ಪಲ್ಲವಿ, ಶಾಸಕ ಶ್ರೀನಿವಾಸ್ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು

error: Content is protected !!